Saturday, December 17, 2011

"ಒಲುಮೆಯ ಹೂವೇ,ನೀ ಹೋದೆ ಎಲ್ಲಿಗೇ?"

ಕೆಲವು ಹಾಡುಗಳು ಹೇಗೋ ಕೆಲವೊಂದು ನೆನಪು ಗಳಿಗೆ ತಳುಕು ಹಾಕಿ ಕೊಂಡು ಬಿಟ್ಟಿರುತ್ತವೆ.ಆ ಹಾಡನ್ನು ನೆನಸಿಕೊಂಡರೆ ಒಬ್ಬ ವ್ಯಕ್ತಿಯ ನೆನಪೋ ಅಥವಾ ,ಒಂದು ಪ್ರಸಂಗದ ನೆನಪೋ ಮರುಕಳಿಸಿಬಿಡುತ್ತದೆ.ನನ್ನ ನೆನಪಿನಲ್ಲಿ ಉಳಿದು ಹೋದಂತಹ ಇಂತಹುದೇ ಒಂದು ಹಾಡು ,ಕನ್ನಡದ ಮಹಾನ್ ಗಾಯಕ ಡಾ.ಪಿ.ಬಿ.ಶ್ರೀನಿವಾಸರು ಅರವತ್ತರ ದಶಕದ ಮೊದಲ ಭಾಗದಲ್ಲಿ 'ಪುನರ್ಜನ್ಮ 'ಎನ್ನುವ ಚಿತ್ರಕ್ಕೆ ಹಾಡಿದ 'ಒಲುಮೆಯ ಹೂವೇ,ನೀ ಹೋದೆ ಎಲ್ಲಿಗೆ' ಎನ್ನುವ ಹಾಡು.ಮೊದಲಿನಿಂದಲೂ ಈ ಹಾಡು ನನಗೆ ಅತ್ಯಂತ ಪ್ರಿಯವಾದ ಹಾಡು.ಅದೆಷ್ಟು ಸಲ ಈ ಹಾಡನ್ನು ಹಾಡಿದ್ದೇನೋ ತಿಳಿಯದು.ಈಹಾಡುನೆನಪಾದಾಗಲೆಲ್ಲಾ ನನ್ನ ಬಹಳ ಆತ್ಮೀಯ ಸ್ನೇಹಿತರೊಬ್ಬರು ನೆನಪಾಗಿ ಬಿಡುತ್ತಾರೆ.ಅವರ ಪರಿಚಯವಾದದ್ದೂ ಒಂದು ವಿಚಿತ್ರ ಸನ್ನಿವೇಶದ ಮೂಲಕ.
ಈಗ ಸುಮಾರು ಹನ್ನೆರಡು ವರ್ಷಗಳ ಹಿಂದೆ ನಡೆದ ಘಟನೆ.ನಾನು ಇ .ಎನ್.ಟಿ.ತಜ್ಞ ವೈದ್ಯಕೀಯ ಶಿಕ್ಷಣ ಮುಗಿಸಿದ ಹೊಸತು.ನನ್ನ ಬಳಿಗೆ ಕಿವಿಯ ಸೋರಿಕೆಯಿಂದ ಎಡ ಕಿವಿ ಕೇಳದ, ಏಳನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಬರುತ್ತಿದ್ದ.ಒಂದು ದಿನ ಬೆಳಿಗ್ಗೆ ಆ ಹುಡುಗ  ತನ್ನ ಬಲಗಿವಿ ವಿಪರೀತ ನೋವೆಂದೂ,ಈಗ ಅದೂ ಕೆಳುತ್ತಿಲ್ಲವೆಂದೂ ,ಕೈಯಿಂದ ಬಲಗಿವಿ ಮುಚ್ಚಿಕೊಂಡು ಅಳುತ್ತಾ ಬಂದ.ಅವನ ತಂದೆಯೂ ಅವನ ಜೊತೆಗೇ ಬಂದಿದ್ದರು.ಅವನ ಬಲಗಿವಿ ಪರೀಕ್ಷೆ ಮಾಡಿದಾಗ ಕಿವಿಯ ಪರದೆಯ ಹರಿದ ಭಾಗದಿಂದ ರಕ್ತ ಬರುತ್ತಿತ್ತು.ಕಿವಿಗೆ ಬಲವಾದ ಪೆಟ್ಟು ಬಿದ್ದದ್ದು ಖಾತ್ರಿ ಯಾಯಿತು.ಯಾರೋ ಜೋರಾಗಿ ಕಪಾಳಕ್ಕೆ ಹೊಡೆದಿದ್ದರು.ಆ ಭಾಗವೆಲ್ಲಾ ಹೊಡೆತದಿಂದ ಕೆಂಪಾಗಿತ್ತು.ನನಗೆ ಅವನ ತಂದೆಯ ಮೇಲೆಯೇ ಅನುಮಾನವಿತ್ತು.
ಬಹಳ ಬಲವಂತ ಮಾಡಿದ ಮೇಲೆ ಅವನ ತಂದೆ ಆ ಹುಡುಗನ ಮಾಸ್ತರರೊಬ್ಬರು ಕಪಾಳಕ್ಕೆ ಹೊಡೆದರೆಂದೂ,ಅದಕ್ಕೇ
ಹೀಗಾಯಿತೆಂದೂ ಹೇಳಿದ.ಮೊದಲೇ ಹುಡುಗನಿಗೆ ಒಂದು ಕಿವಿ ಕೇಳುತ್ತಿರಲಿಲ್ಲ.ಈಗ ಕಪಾಳಕ್ಕೆ ಹೊಡೆದು ಇನ್ನೊಂದು ಕಿವಿಯೂ ಕೇಳದ ಹಾಗೆ ಮಾಡಿ ಬಿಟ್ಟರಲ್ಲಾ ಎಂದು ನನಗೆ ಆ ಮಾಸ್ತರರ ಮೇಲೆ ವಿಪರೀತ ಸಿಟ್ಟು ಬಂತು.ಆ ಮಾಸ್ತರರನ್ನು ನನ್ನ ಬಳಿಗೆ ಕಳಿಸುವಂತೆ ಹೇಳಿದೆ.ಅದಕ್ಕೆ ಅವನ ತಂದೆ 'ಬಿಡಿ ಸಾರ್.ಇದನ್ನ ದೊಡ್ಡ ವಿಷಯ ಮಾಡಬೇಡಿ.ಆ ಮಾಸ್ತರರು ತುಂಬಾ ಒಳ್ಳೆಯವರು.ಇವನೇ ಏನೋ ಮಾಡಬಾರದ ತೀಟೆ ಮಾಡಿರುತ್ತಾನೆ.ಅದಕ್ಕೇ ಅವರು ಏಟು ಕೊಟ್ಟಿದ್ದಾರೆ,ನೀವೇ ಏನಾರ ಔಷಧಿ ಕೊಟ್ಟು ಸರಿ ಮಾಡಿಬಿಡಿ 'ಎಂದ.ನಾನೂ ಸುಮ್ಮನಾದೆ.
ಈ ಘಟನೆ ನಡೆದ ಎರಡು ದಿನಕ್ಕೆ ಒಬ್ಬ ವ್ಯಕ್ತಿ ನನ್ನ ರೂಮಿನ ಹೊರಗೆ ನಿಂತು 'ಒಳಗೆ ಬರಬಹುದಾ ಸರ್'ಎಂದರು . 'ಬನ್ನಿ 'ಎಂದೆ.ಒಳಗೆ ಬಂದು ಕೂತರು.ಮುಖ ಆತಂಕದಿಂದ ಬೆವರುತ್ತಿತ್ತು.ದನಿ ನಡುಗುತ್ತಿತ್ತು.ತಮ್ಮ ಹೆಸರು ಹೇಳಿ ಪರಿಚಯ ಮಾಡಿಕೊಂಡು 'ಬಿ.ಪಿ.ಚೆಕ್ ಮಾಡಿಸ್ಕೋ ಬೇಕಾಗಿತ್ತು ಸರ್ 'ಎಂದರು.ಬಿ.ಪಿ.ಸುಮಾರಾಗಿಯೇ ಜಾಸ್ತಿ ಇತ್ತು.'ಸಾರ್ ನಾನು ಇಲ್ಲಿ ಮಿಡ್ಲ್ ಸ್ಕೂಲ್ ಮೇಷ್ಟ್ರು.ನನ್ನಿಂದ ಬಹಳ ದೊಡ್ಡ ತಪ್ಪಾಯಿತು.ಕ್ಷಮಿಸಿ ಬಿಡಿ ಸರ್ 'ಎಂದರು.ನಾನು 'ಯಾಕ್ರೀ ಮೇಷ್ಟ್ರೇ ಏನಾಯ್ತು ?'ಎಂದೆ.'ಆ ಹುಡುಗನಿಗೆ ಕಪಾಳಕ್ಕೆ ಹೊಡೆದದ್ದು ನಾನೇ ಸರ್ 'ಎಂದರು.ನಾನು ಸ್ವಲ್ಪ ಬಿಗುವಾದೆ.'ಅಲ್ಲಾ ಮೇಷ್ಟ್ರೇ  ಹುಡುಗರು ತಪ್ಪು ಮಾಡಿದರೆ ತಿದ್ದ ಬೇಕು ಸರಿ.ಆದರೆ ಈ ರೀತಿ ಕಿವಿಯ ತಮಟೆ ಹರಿದು ಹೋಗುವ ಹಾಗೆ ಹೊಡೆಯಬೇಕೆ?ಅದು ತಪ್ಪಲ್ಲವೇ ? ಅವನ ಜೀವಕ್ಕೆ ಅಪಾಯ ವಾಗಿದ್ದರೆ ಏನು ಗತಿ?ಅವನಿಗೆ ಕೇಳುತ್ತಿದ್ದ ಒಂದೇ ಕಿವಿ ಕೂಡ ನೀವು ಹೊಡೆದ ದ್ದರಿಂದ ಹಾಳಾಯಿತಲ್ಲ!'ಎಂದೆ.'ಆ ಹುಡುಗ ಯಾವುದೋ ಹುಡುಗಿಯ ಬಗ್ಗೆ ಬಹಳ ಕೆಟ್ಟ ಪದ ಉಪಯೋಗಿಸಿದ ಸಾರ್.ಮೊದಲೇ ಬಿ.ಪಿ. ಇದೆ.ಸಿಟ್ಟು ಬಂದು ಕಪಾಳಕ್ಕೆ ಒಂದೇಟು ಬಿಟ್ಟೆ .ಈ ರೀತಿಯೆಲ್ಲಾ ಆಗುತ್ತೆ ಅಂತ ಗೊತ್ತಿರಲಿಲ್ಲ .ಇನ್ನು ಮೇಲೆ ಹುಡುಗರ ಮೇಲೆ ಕೈ ಮಾಡೋಲ್ಲ  .ಜೀವನದಲ್ಲಿ ಒಂದು ದೊಡ್ಡ ಪಾಠ ಕಲಿತೆ 'ಎಂದು ಗಧ್ಗದ ಕಂಠದಲ್ಲಿ ಹೇಳಿ ಹೊರಟು ಹೋದರು.
ಅದಾದ ನಂತರ ನಾನು  ದಿನಾ ಬೆಳಗಿನ ಜಾವ ಸ್ಕೂಲಿನ ಗ್ರೌಂಡ್ ಗೆ ವ್ಯಾಯಾಮ ಮತ್ತು ಜಾಗಿಂಗ್ ಮಾಡುವುದಕ್ಕೆ ಹೋಗುತ್ತಿದ್ದಾಗ ಅವರೂ ಸಿಗುತ್ತಿದ್ದರು.ಬಹಳ ಒಳ್ಳೆಯ ಮನಸ್ಸಿನ ವ್ಯಕ್ತಿ.ಸ್ವಲ್ಪ ಮುಂಗೊಪವಿತ್ತು.ಯಾರಿಗಾದರೂ ಸಹಾಯಮಾಡಬೇಕಾದರೆ 'ನಾ ಮುಂದೆ' ಎನ್ನುವಂತಹವರು.ಪರಿಚಯ ಸ್ನೇಹಕ್ಕೆ ತಿರುಗಿತು.ಕೆಲವೇ ದಿನಗಳಲ್ಲಿ 
ಬಹಳ ಆತ್ಮೀಯರಾದರು.ವ್ಯಾಯಾಮವೆಲ್ಲಾ ಮುಗಿಸಿ,ಬೆವರು ಹರಿಸುತ್ತಾ ,ತಂಗಾಳಿಗೆ ಮೈ ಒಡ್ಡಿ ಕುಳಿತಾಗ 
ನಾನು ನನಗೆ ಪ್ರಿಯವಾದ 'ಒಲುಮೆಯ ಹೂವೇ'ಹಾಡನ್ನು ಹೇಳುತ್ತಿದ್ದೆ.ಮೇಷ್ಟ್ರಿಗೆ ಕೂಡ ಈ ಹಾಡು
ಬಹಳ ಇಷ್ಟವಾಗಿತ್ತು .ನಾನು ಹಾಡುವಾಗ ಬಹಳ ಖುಷಿ ಪಡುತ್ತಿದ್ದರು.ಹಾಡು ಕೇಳುತ್ತಾ ಎಷ್ಟೋ ಸಲ ಅವರ ಕಣ್ಣಿನಲ್ಲಿ ನೀರು ಇರುತ್ತಿತ್ತು.2000 april ನಲ್ಲಿ ಅವರಿಗೆ ಎಲೆಕ್ಷನ್ ಡ್ಯೂಟಿಹಾಕಿದ್ದರು.'ಸಾರ್ ನನಗೆ ಎಲೆಕ್ಷನ್ ಡ್ಯೂಟಿ ಗೆ ಹೋಗೋಕೆ ಆಗೋಲ್ಲಾ ,ಒಂದು ಮೆಡಿಕಲ್  ಸರ್ಟಿಫಿಕೇಟ್ ಕೊಡಿ'ಎಂದರು.'ಯಾಕೇ ಮೇಷ್ಟ್ರೇ ?ಏನು ತೊಂದರೆ?'ಎಂದೆ.ಎಲೆಕ್ಷನ್ ಡ್ಯೂಟಿ ತಪ್ಪಿಸೋಕೆ ಎಲ್ಲರೂ ಮಾಡುವ ಸಾಮಾನ್ಯ ಉಪಾಯ ಇದು.'ನಡೆಯೋವಾಗ ಯಾಕೋ ಬ್ಯಾಲೆನ್ಸ್ ತಪ್ಪುತ್ತೆ ಸರ್' ಎಂದರು.ಎಲ್ಲಾ ಪರೀಕ್ಷೆ ಮಾಡಿದಾಗ ನಿಜಕ್ಕೂ ತೊಂದರೆ ಇದೆ ಎನಿಸಿ, C.T.SCAN ಮಾಡಿಸಿಕೊಂಡು ಬರಲು ಬೆಳಗಾವಿಯ ಕೆ.ಎಲ್.ಇ .ಆಸ್ಪತ್ರೆಗೆ ಕಳಿಸಿದೆ.ಅಲ್ಲಿ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಇರುವುದು ಪತ್ತೆಯಾಯಿತು.ಅದು ಶ್ವಾಶಕೋಶಕ್ಕೂ,ಮೆದುಳಿಗೂ ಹರಡಿತ್ತು.ಅವರಿಗೆ ಸುಮಾರು ಹದಿನೆಂಟು ವರ್ಷಗಳಿಂದ ಥೈರಾಯ್ಡ್ ಗ್ರಂಥಿ ಯಲ್ಲಿ ಒಂದು ಸಣ್ಣ ಗಡ್ದೆ ಇತ್ತಂತೆ.ನನಗೂ ಕೂಡ ಮೊದಲೇ ತಿಳಿಸಿರಲಿಲ್ಲ .ಅವರನ್ನು ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗೆ ಸೇರಿಸಿದೆವು. ಸ್ನೇಹಿತರೆಲ್ಲಾ ಸೇರಿ ಅವರ ಚಿಕಿತ್ಸೆಯ ಖರ್ಚಿಗೆಂದು ಸುಮಾರು  ಒಂದು ಲಕ್ಷಕ್ಕೂ ಹೆಚ್ಚು ಹಣವನ್ನು ಸ್ವಇಚ್ಛೆಯಿಂದ ಸೇರಿಸಿ ಕೊಟ್ಟೆವು.
ನನಗೆ ಅಷ್ಟರಲ್ಲಿ ರಾಯಚೂರಿನ ಶಕ್ತಿನಗರಕ್ಕೆ ವರ್ಗವಾಗಿತ್ತು.ಒಂದೆರಡು ತಿಂಗಳ ನಂತರ ಅವರನ್ನು ನೋಡಲು ರಾಯಚೂರಿನಿಂದ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೋದೆ.ಸ್ಪೆಷಲ್ ವಾರ್ಡಿನ ರೂಮೊಂದರಲ್ಲಿ ಒಬ್ಬರೇ ಇದ್ದರು.Brain surgery ಮಾಡಿ ತಲೆಗೆಲ್ಲಾ ಬ್ಯಾಂಡೇಜ್ ಸುತ್ತಿದ್ದರು.ನನ್ನನ್ನು ನೋಡಿ ಮೇಷ್ಟ್ರಿಗೆ ತುಂಬಾ ಖುಷಿಯಾಯಿತು.ಆನದದಿಂದ ತಬ್ಬಿಕೊಂಡರು.

 'ಸರ್ ಆಪರೇಶನ್ ಆಯ್ತು .ನೀವೂ ನೋಡೋಕೆ ಬಂದ್ರಿ.ಇನ್ನು ಎಲ್ಲಾ ಸರಿ ಹೋಗುತ್ತೆ ಸರ್.ನಿಮ್ಮನ್ನು ನೋಡೋಕೆ ಮುಂದಿನ ಸಲ ಶಕ್ತಿನಗರಕ್ಕೆ ನಾನೇ ಬರುತ್ತೇನೆ'ಎಂದರು. ಆ ಆಯಾಸದಲ್ಲೂ ಸುಮಾರು ಒಂದು ಗಂಟೆ ಹರಟಿದರು.'ಹೆಚ್ಚು ಮಾತನಾಡಬೇಡಿ ಮೇಷ್ಟ್ರೇ ,ಆಯಾಸ ಆಗುತ್ತೆ 'ಎಂದರೂ ಕೇಳಲಿಲ್ಲ.ಕೊನೆಗೆ ನಾನು ಹೊರಟು ನಿಂತೆ.'ಸಾರ್ ,ನಾನಿನ್ನು ಬದುಕುತ್ತೀನೋ ಇಲ್ಲವೋ ಗೊತ್ತಿಲ್ಲ ,ನನಗೋಸ್ಕರ ಒಂದುಸಲ ಆ ಹಾಡು ಹಾಡಿ ಬಿಡಿ ಸರ್' ಎಂದರು!ಕ್ಯಾನ್ಸರ್ ವಾರ್ಡಿನಲ್ಲಿ ಹಾಡೇ!!?ನಾನು ನನ್ನ ಕನಸು ಮನಸಿನಲ್ಲೂ ಇಂತಹ ಸಂದರ್ಭ
ಊಹಿಸಿಕೊಂಡಿರಲಿಲ್ಲ.'ಬಿಸಿ ತುಪ್ಪ ಉಗುಳುವಂತಿಲ್ಲ,ನುಂಗುವಂತಿಲ್ಲ' ಎನ್ನುವಂತಾಗಿತ್ತು ನನ್ನ ಪರಿಸ್ಥಿತಿ !ಅವರನ್ನು ಆ ಸ್ಥಿತಿ ಯಲ್ಲಿ ನೋಡಿ ಮನಸ್ಸು ಬಹಳ ನೊಂದಿತ್ತು.ಹಾಡುವ ಮೂಡ್ ಇರಲಿಲ್ಲ.ಅವರ ಮನಸ್ಸನ್ನು ನೋಯಿಸದಿರಲು ಅನಿವಾರ್ಯವಾಗಿ ಹಾಡಲೇ ಬೇಕಾಯಿತು.ನನ್ನೆಲ್ಲಾ ನೋವನ್ನೂ ಹೊರ ಹಾಕುವಂತೆ,ಜೀವನದಲ್ಲಿ ಅದೇ ನನ್ನ ಕಡೆಯ ಹಾಡು ಎಂಬಂತೆ ನನ್ನನ್ನೇ ಮರೆತು ಹಾಡಿದೆ!'ಒಲುಮೆಯ ಹೂವೇ,ನೀ ಹೋದೆ ಎಲ್ಲಿಗೇ!ಉಳಿಸಿ ಕಣ್ಣ ನೀರ,ಈ ನನ್ನ ಬಾಳಿಗೇ'.ಹಾಡು ಮುಗಿಯುವ ವೇಳೆಗೆ ಇಬ್ಬರ ಕಣ್ಣಲ್ಲೂ ಧಾರಾಕಾರ ನೀರು!ಭಾರ ಹೃದಯದಿಂದ ಅವರನ್ನು ಬೀಳ್ಕೊಟ್ಟೆ.ಇದಾದ ಕೆಲವೇ ತಿಂಗಳಲ್ಲಿ ಮೇಷ್ಟ್ರು ತನ್ನ ಇಹ ಲೋಕ ಯಾತ್ರೆ ಮುಗಿಸಿದ್ದರು.ಕಾಣದ ಲೋಕಕ್ಕೆ ಪಯಣ ಬೆಳೆಸಿದ ಆ ನನ್ನ ಆತ್ಮೀಯ ಸ್ನೇಹಿತನಿಗೆ ಈ ನನ್ನ ಮೆಚ್ಚಿನ ಗೀತೆಯ ಮೂಲಕನಮನಗಳನ್ನು ಸಲ್ಲಿಸುತ್ತಿದ್ದೇನೆ.'ಒಲುಮೆಯ ಹೂವೇ!ನೀ ಹೋದೆ ಎಲ್ಲಿಗೇ !ಉಳಿಸಿ ಕಣ್ಣ ನೀರ ಈ ನನ್ನ ಬಾಳಿಗೇ '.

(ಇದು ಹೋದ ವರ್ಷ ಆಗಸ್ಟ್ ನಲ್ಲಿ ಹಾಕಿದ್ದ ಲೇಖನ.ಹೊಸದೇನನ್ನೂ ಬರೆದಿಲ್ಲವಾದ್ದರಿಂದ ನನಗೆ ಇಷ್ಟವಾಗಿದ್ದ ಈ ಹಳೆಯ ಲೇಖನವನ್ನೇ ಹಾಕುತ್ತಿದ್ದೇನೆ.)

18 comments:

  1. eraDane saari oduttiddarU modalinashTE novu tarisitu sir.....
    bareda riti suppar....

    inthaha stiti yaarigu baaradirali...

    ReplyDelete
  2. ಡಾಕ್ಟ್ರೇ ಮೊದಲಿನ ಲೇಖನ ಓದಿರಲಿಲ್ಲ...ಇವತ್ತಿನ ಲೇಖನ ಓದಿದೆ..ಭಾವಪೂರ್ಣ ಅಂತೆಲ್ಲಾ ಶಬ್ದ ಕೇಳಿದ್ದೆ ,ಬಹುಷಃ ಇದೇ ತಹದ ಲೇಖನಗಳಿಗೆ ಹೇಳುತ್ತಾರೇನೋ...
    ಬರೆದ ರೀತಿ ಸಕತ್ ಇಷ್ಟ ಆಯ್ತು...

    ಧನ್ಯವಾದಗಳೊಂದಿಗೆ,
    ನಿಮ್ಮನೆ ಹುಡುಗ
    ಚಿನ್ಮಯ ಭಟ್

    ReplyDelete
  3. ಕಳೆದ ವರ್ಷದ ಒಂದು ಒಳ್ಳೆಯ ಲೇಖನ ಮತ್ತೆ ನೆನಪಿಸಿದ್ದೀರ.ನಿಮ್ಮ ಇಂತಹ ಲೇಖನಗಳು ಹಾಗು ನಿಮ್ಮ ಅನುಭವಗಳು ಬಹಳ ಇಷ್ಟವಾಗಿ ನೀವು ನಮಗೆ ಆಪ್ತವಾಗಿ ಬಿಡುತ್ತೀರಾ. ಜೈ ಹೋ ಸರ್.

    ReplyDelete
  4. ನಿಮ್ಮ ಲೇಖನ ಓದುತ್ತಿದ್ದಂತೆ ಲಗ್ಗೆ ಇಟ್ಟಿದ್ದು YOU TUBEಗೆ Thankyou sir

    ನೀವು ಸಹ ಕೇಳಿ ಆ ಹಾಡು
    http://youtu.be/HP8sCzPzumo

    ReplyDelete
  5. ಟಿ.ಡಿ.ಕೆ. ಬಹಳ ಮನಮುಟ್ಟಿದ ಘಟನೆ, ಮೇಷ್ಟ್ರ ಅಪರಾಧಿ ಭಾವ ತಪ್ಪೊಪ್ಪಿಗೆ, ಅವರ ಮೃದು ಮನಸಿಗೆ ತಟ್ಟಿದ್ದ ಬಿ.ಪಿ.ಶಾಪ್.. ನಂತರ ಬಂದ ಕ್ಯಾನ್ಸರ್ ಮಾರಿ, ನಿಮ್ಮಿಬ್ಬರ ನಡುವಣ ಸ್ನೇಹ... ಎಲ್ಲದಕ್ಕೂ ವಿಶೇಷ ಮೆರಗು ನೀಡಿದ ಪಿ.ಬಿ.ಎಸ್ ಹಾಡು...ಉಳಿಸಿ ಕಣ್ಣ ನೀರ ಈ ನನ್ನ ಬಾಳಿಗೇ... ತುಂಬಾ ಭಾವುಕನಾದೆ ನಿಮ್ಮ ಕಡೆಯ ಸಾಲುಗಳನ್ನು ಓದುವಾಗ...

    ReplyDelete
  6. ಮರುಕದ ಘಟನೆ... ನಿಮ್ಮ ಸ್ನೇಹಿತರು ಈ ಹಾಡಿನ ಮೂಲಕ ಸದಾ ನಿಮ್ಮೊಳಗಿರುತ್ತಾರೆ. ಇಂತಹ ಅನುಭವಗಳನ್ನೇಲ್ಲಾ ನಮ್ಮೊಂದಿಗೆ ಹಂಚಿಕೊಳ್ಳುತ್ತಲಿದ್ದೀರಿ ಬಹಳ ಧನ್ಯವಾದಗಳು.

    ReplyDelete
  7. ಮನ ಕಲಕುವ ಸ್ಮರಣೀಯ ಘಟನೆ ಸರ್, ನಾನೀಗ YOU TUBEನಲ್ಲಿ ಆ ಹಾಡನ್ನು ಕೇಳುತ್ತಲೇ ಪ್ರತಿಕ್ರಿಯಿಸುತ್ತಿದ್ದೇನೆ. ಕಡೆಯ ಸಾಲನ್ನು ಓದುವಾಗ ಕಣ್ಣುಗಳು ತು೦ಬಿ ಬ೦ದವು. ನಿಮ್ಮ ಅನುಭವಗಳನ್ನು ಹ೦ಚಿಕೊಳ್ಳುವ ಮೂಲಕ ನಮಗೆ ಮಾರ್ಗದರ್ಶಕರಾಗಿದ್ದೀರಿ. ಧನ್ಯವಾದಗಳು.

    ReplyDelete
  8. ಮನ ಕಲಕುವ ಘಟನೆಯನ್ನು ಹ೦ಚಿಕೊ೦ಡಿದ್ದೀರಿ. ಭಾವಪೂರ್ಣರಾಗಿ ವಿವರಿಸಿದ್ದೀರಿ. ಅಭಿನ೦ದನೆಗಳು ಡಾ.

    ಅನ೦ತ್

    ReplyDelete
  9. ತಡವಾಗಿ ಪ್ರತಿಕ್ರಿಯಿಸಿದ್ದೇನೆ ಕ್ಷಮೆ ಇರಲಿ.

    ಮನಸೇಕೋ ಮ್ಲಾನವಾಯಿತು. ಮೇಸ್ಟ್ರ ಮರಣ ನಿಮ್ಮನ್ನೆಷ್ಟು ನೋಯಿಸಿರಬೇಕು ಎಂಬುದು ನಮ್ಮ ಕಲ್ಪನೆಗೆ ನಿಲುಕದು.

    ಸಿನಿಮಾ ಹಾಡುಗಳು ಭಾರತೀಯ ಮನಸ್ಸುಗಳ ಅವಿಭಾಜ್ಯ ಅಂಗ ಎಂಬುದಕ್ಕೆ ನಿಮ್ಮ ಈ ಲೇಖನವೇ ಸಾಕ್ಷಿ.

    ನನ್ನ ಬದುಕಲ್ಲಿ ಹಿಂದಿ 'ಯಾರಾನ' ಚಿತ್ರದ :
    "ಚೂಕರ್ ಮೇರೆ ಮನಕೋ" ಎಂದಾಗ ಮದರಾಸಿನ ವಾಣಿ ನೆನಪಾದರೆ,
    "ಈ ರಾಧೆ ಜೀವ ಕುಣಿದಾಡಿತೀಗ"
    ಕೇಳಿದಾಗ ಕಾಲೇಜಿನ ಜೀವ ಗೆಳತಿ ಮಂಜುಳ ನೆನಪಾಗಿ, ಮನಸು ವಿಲ ವಿಲ!

    "ನಿಮ್ಮ ಅತ್ಯುತ್ತಮ ಬರಹಗಳಲ್ಲಿ ಇದೂ ಒಂದು ಡಾಕ್ಟ್ರೇ."

    [ಅಂದ ಹಾಗೆ ಮೇಸ್ಟ್ರುಗಳು ಹೊಡೆಯದೇ ಬೋಧನೆ ಮಾಡಲು ಸಾಧ್ಯವೇ ಇಲ್ಲವೇ ಸಾರ್!]

    ReplyDelete
  10. ಚೆನ್ನಾಗಿದೆ ಸರ್.
    ಸ್ವರ್ಣ

    ReplyDelete
  11. ತುಂಬಾ ಭಾವನಾತ್ಮಕ ಬರಹ ಸರ್.ನನ್ನ ಕಣ್ಣೂ ಒದ್ದೆಯಾಯ್ತು.

    ReplyDelete
  12. ಪ್ರತಿಕ್ರಿಯಿಸಿದ ಎಲ್ಲಾ ಬ್ಲಾಗ್ ಬಂಧುಗಳಿಗೆ ಧನ್ಯವಾದಗಳು.ತಮ್ಮೆಲ್ಲರ ಪ್ರೋತ್ಸಾಹ ಹೀಗೇ ಮುಂದುವರಿಯಲಿ ಎಂದು ಹಾರೈಕೆ.ನಮಸ್ಕಾರ.

    ReplyDelete
  13. so... u also agree... old is gold.....

    ReplyDelete
  14. ಕೃಷ್ಣಮೂರ್ತಿಯವರೆ,
    ಗಣಕಯಂತ್ರದ ಸಮಸ್ಯೆಯಿಂದಾಗಿ, ನಿಮ್ಮ ಲೇಖನವನ್ನು ಇಂದೇ ನೋಡಬೇಕಾಯಿತು.
    ತುಂಬ ಹೃದಯಸ್ಪರ್ಶಿಯಾದ ಘಟನೆಯನ್ನು ಬರೆದಿರುವಿರಿ. ಪಾಪ, ‘ಒಲುಮೆಯ ಹೂವೇ, ನೀ ಹೋದೆ ಎಲ್ಲಿಗೆ?’ ಎನ್ನುವದು ಆ ಗುರುಗಳಿಗೆ ಹಾಡಿದ ಚರಮಗೀತೆಯಾಯಿತೆ!
    (ಇದು ನನಗೂ ತುಂಬ ಇಷ್ಟವಾದ ಹಾಡು.)

    ReplyDelete
  15. ಮನಕಲಕುವ ಚಿತ್ರಣ. ಆ ಹಾಡಿನ ಬಗ್ಗೆ ಹೇಳುವುದಾದರೆ, ಚಿಕ್ಕಂದಿನಿಂದಲೂ ಯಾಕೋ ಅದನ್ನು ಅಯಾಚಿತವಾಗಿ ಆಗಾಗ ಗುನುಗಿಕೊಳ್ಳತ್ತಿರುತ್ತೇನೆ...

    ReplyDelete
  16. ಮೊದಲೇ ಓದಿದ್ದೆ ಸರ್..ಮತ್ತೊಮ್ಮೆ ಓದಿದರೂ ಬೇಸರವಾಗಲಿಲ್ಲ. ತುಂಬಾ ಚೆನ್ನಾಗಿದೆ..

    ReplyDelete
  17. ಮನ ಮುಟ್ಟುವ ಘಟನೆ. ತುಂಬಾ ಚೆನ್ನಾಗಿ ಬರೆದಿದ್ದಿರಾ ಸಾರ್.

    ReplyDelete
  18. ಬದುಕೇಹಾಗಲ್ವಾ.... ಅಂದುಕೊಂಡದ್ದು ನಡೆದರೆ ದುಃಖ ವೆಲ್ಲಿಯದು .ನಿಮ್ಮ ಬರಹ ಒದಿ ಒಮ್ಮೆ ಮೂಕಳಾಗಿ ಬಿಟ್ಟೆ,,,,

    ReplyDelete

Note: Only a member of this blog may post a comment.